ಕಾಪು : 2020-22ನೇ ಸಾಲಿನಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕೆಎಂಎಫ್ ಆಡಳಿತ ಮಂಡಳಿ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.
ರಾಜ್ಯದ ವಿವಿಧ ಸಹಕಾರ ಕ್ಷೇತ್ರಗಳಲ್ಲಿ ಸುದೀರ್ಘ ಅವಧಿಯಲ್ಲಿ ಕಾಪು ದಿವಾಕರ ಶೆಟ್ಟಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.
ಕಾಪು ದಿವಾಕರ ಶೆಟ್ಟಿಯವರು 1981ರಲ್ಲಿ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ, 1987ರಲ್ಲಿ ಕಾಪು ಮಂಡಲ ಪಂಚಾಯತ್ ಸದಸ್ಯರಾಗಿ, 1993 ರಿಂದ
2001 ರವರೆಗೆ ಉಳಿಯಾರಗೋಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, 1990ರಲ್ಲಿ ಕೇಂದ್ರ ಸರ್ಕಾರದ ರೈಲ್ವೇ ಇಲಾಖೆಯ ದಕ್ಷಿಣ ರೈಲ್ವೇ ಸಲಹಾ ಸಮಿತಿಯ ಸದಸ್ಯರಾಗಿ, 1998 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ,
2014ರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. 1990ರಲ್ಲಿ ಉಳಿಯಾರಗೋಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ತಮ್ಮ ಸೇವೆಯನ್ನು ಆರಂಭಿಸಿ
ಪ್ರಸ್ತುತ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಮಂಗಳೂರು, ಇಲ್ಲಿಗೆ ಅಂದಿನಿಂದಲೂ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದು, ಎರಡು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುತ್ತಾರೆ. ಮುಂದುವರೆದು, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆಯನ್ನು ಮುಂದುವರಿಸಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು 2004ರಲ್ಲಿ "ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ "ಅತ್ಯುತ್ತಮ ಹೈನುಗಾರ ಪ್ರಶಸ್ತಿ-2009" ರಲ್ಲಿ ನೀಡಿ ಗೌರವಿಸಲಾಗಿದ್ದು, ಪ್ರಸ್ತುತ "ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನಗರದ ರವೀಂದ್ರ ಕಲಾಕ್ಷೇತ್ರ ದಲ್ಲಿ ಮೇ 25ರಂದು ಸಂಜೆ 6.30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.