ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಕ್ಕಳ ದಿನಾಚರಣೆ : ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ

Posted On: 11-11-2022 11:41PM

ಉಡುಪಿ : ಮಾನವ ಬಂಧುತ್ವ ವೇದಿಕೆ ಕರ್ನಾಟಕ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇವರ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಚಿತ್ರ (ಡ್ರಾಯಿಂಗ್) ಬಿಡಿಸುವ ಇದೇ ನವೆಂಬರ್ 13 ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಉದ್ಯಾವರ ಝೇವಿಯರ್ ಸಭಾಭವನದಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

3 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಒಂದರಿಂದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಗೆ 'ಪರಿಸರ', ಐದರಿಂದ ಏಳನೇ ತರಗತಿ ವಿದ್ಯಾರ್ಥಿಗಳಿಗೆ 'ಸಂಭ್ರಮ', ಎಂಟರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ 'ಮಕ್ಕಳು ಕಂಡಂತೆ ನೆಹರು' ಎಂಬ ವಿಷಯಗಳ ಬಗ್ಗೆ ಡ್ರಾಯಿಂಗ್ ಸ್ಪರ್ಧೆ ನಡೆಯಲಿದೆ.

3 ವಿಭಾಗಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಮತ್ತು 3 ಸಮಾಧಾನಕರ ಬಹುಮಾನ ಮತ್ತು ನಗದು ನೀಡಲಾಗುತ್ತಿದ್ದು, ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುತ್ತದೆ. ಮಕ್ಕಳಿಗೆ ಬೆಳಗಿನ ಫಲಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧೆಯ ಅವಧಿ 2 ಗಂಟೆಗೆ ಮೀಸಲಾಗಿದ್ದು, ಸಂಘಟಕರು ಸ್ಪರ್ಧಿಗಳಿಗೆ ಡ್ರಾಯಿಂಗ್ ಹಾಳೆ ಮಾತ್ರ ವಿತರಿಸಲಿದ್ದಾರೆ. ಉಳಿದೆಲ್ಲ ಪರಿಕರಗಳನ್ನು ಸ್ಪರ್ಧಿಗಳೇ ತರತಕ್ಕದ್ದು. ಹೆಸರು ನೋಂದಾಯಿಸಲು ಸ್ಥಳದಲ್ಲಿ ಅವಕಾಶ ಇದೆ ಎಂದು ಸಂಘಟಕರು ತಿಳಿಸಿದ್ದಾರೆ.

ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ರಾಜ್ಯ ಸಮಿತಿಯ ಸದಸ್ಯರಾಗಿರುವ ಉದ್ಯಮಿ ರೊನಾಲ್ಡ್ ಮನೋಹರ್ ಕರ್ಕಡ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಸಂಚಲನಾ ಸಮಿತಿ ಈಗಾಗಲೇ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಜೊತೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ವಿವಿಧ ಭಾಗದ ಮಕ್ಕಳು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಈಗಾಗಲೇ ಹಲವಾರು ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು ಸ್ಥಳದಲ್ಲಿಯೇ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.