ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ವಿಷಯದ ಕುರಿತು ಅಭಿಯಾನ

Posted On: 12-06-2023 05:45PM

ಶಿರ್ವ : ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ ಮತ್ತು ಪರಿಸರ ಕ್ಲಬ್ ಜಂಟಿಯಾಗಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಮತ್ತು ವಿಶ್ವಪರಿಸರ ದಿನದ ಅಂಗವಾಗಿ “ಪ್ಲಾಸ್ಟಿಕ್ ವಿರುದ್ಧ ಜಾಗೃತಿ” ಅಭಿಯಾನವನ್ನು ಆಯೋಜಿಸಿತ್ತು. ಸಾರ್ವಜನಿಕರಲ್ಲಿ ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಈ ಅಭಿಯಾನದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿ ಶಂಕರಪುರ ಮತ್ತು ಉಡುಪಿಯಲ್ಲಿರುವ ಮೆಡಿಕಲ್ ಶಾಪ್ ಮತ್ತು ದಿನಸಿ ಅಂಗಡಿಗಳಿಗೆ ತಾವು ತಯಾರಿಸಿದ ಪೇಪರ್ ಬ್ಯಾಗ್ ಮತ್ತು ಕವರ್‌ಗಳನ್ನು ವಿತರಿಸಿದರು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆಗೊಳಿಸುವುದು, ಮರುಬಳಕೆ ಮಾಡುವುದು ಮತ್ತು ಮರು ಉತ್ಪಾದಿಸುವುದು ಎಂಬ ವಿಷಯವನ್ನು ಕೇಂದ್ರಿಕರಿಸುವ ಮೂಲಕ ತ್ಯಾಜ್ಯವನ್ನು ಕಡಿಮೆಗೊಳಿಸುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು. ಅಂತೆಯೇ ಕಾಗದದವಸ್ತುಗಳನ್ನು ಉಪಯೋಗಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್, ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್ ವಿದ್ಯಾರ್ಥಿಗಳ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ನಾಗರಾಜ್ ರಾವ್ ಈ ಕಾರ್ಯಕ್ರಮವನ್ನು ಸಂಯೋಜಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸದಸ್ಯರಾದ ಡಾ. ಸುಬ್ಬುಲಕ್ಷ್ಮಿ ಎನ್ ಕಾರಂತ್, ಗಣೇಶ್ ಶೆಟ್ಟಿ, ಜಯರಾಮ್ ನಾಯಕ್, ರುಕ್ಮಿಣಿ ಭಟ್ ಮತ್ತು ಅರ್ಚನಾ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಿದ್ದರು.