ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಟಪಾಡಿ : ತ್ರಿಶಾ ವಿದ್ಯಾ ಪಿ.ಯು ಕಾಲೇಜು - ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮ

Posted On: 16-06-2023 12:41PM

ಕಟಪಾಡಿ : ಸತತ ಪರಿಶ್ರಮ ಇದ್ದಾಗ ಮಾತ್ರ ಗೆಲುವು ಸಾಧ್ಯ. ಪ್ರಸ್ತುತ ಜಗತ್ತಿನಲ್ಲಿ ಯಾವುದೇ ಕ್ಷೇತ್ರದಲ್ಲಾದರೂ ಅವಕಾಶಗಳು ಬಹಳಷ್ಟಿವೆ. ಅದನ್ನು ಸಾಧಿಸಲು ಛಲ ಹಾಗೂ ಪ್ರಯತ್ನ ಬೇಕು. ಶಿಕ್ಷಣ ಮಾತ್ರ ವಿದ್ಯಾರ್ಥಿಯ ಜೀವನವನ್ನು ಬೆಳಗಿಸುವಂತದ್ದು. ಜೊತೆಗೆ ಬದಲಾವಣೆಗಳಿಗೆ ಹೊಂದಿಕೊಂಡು ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತೇವೆ ಅನ್ನುವುದು ನಿರ್ಣಾಯಕ. ದೈಹಿಕ ಹಾಗೂ ಮಾನಸಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ವಿದ್ಯಾರ್ಥಿಯು ಪ್ರಬುದ್ಧನಾಗಲು ಸಾಧ್ಯ ಎಂದು ತ್ರಿಶಾ ಸಂಸ್ಥೆಯ ಸಂಸ್ಥಾಪಕ ಸಿ. ಎ ಗೋಪಾಲಕೃಷ್ಣ ಭಟ್ ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪುನಶ್ಚೇತನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕುರಿತು ಹೇಳಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಎಸ್.ವಿ.ಎಸ್. ವಿದ್ಯಾವರ್ಧಕ ಸಂಘದ ಸಂಚಾಲಕರಾದ ಸತ್ಯೇಂದ್ರ ಪೈ ರವರು ತ್ರಿಶಾ ಕಾಲೇಜು ಕಟಪಾಡಿ ಗ್ರಾಮಕ್ಕೆ ಹೆಮ್ಮೆಯ ಸಂಗತಿ. ಕೇವಲ ಪಾಠಗಳಷ್ಟೇ ಅಲ್ಲದೆ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಿರುವುದು ಕಾಲೇಜಿನ ವಿಶೇಷವೇ ಸರಿ. ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿರುವುದು ಶ್ಲಾಘನೀಯ ವಿಷಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಿದ್ಧಾಂತ ಫೌಂಡೇಶನ್ ನ ಖಜಾಂಚಿಯಾದ ನಮಿತಾ ಜಿ. ಭಟ್ ಉಪಸ್ಥಿತರಿದ್ದರು.

ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಅನಂತ್ ಪೈ ರವರು,ವಿಜ್ಞಾನದಲ್ಲಿ ಪಿ.ಸಿ.ಎಂ.ಬಿ ಹಾಗೂ ಪಿ.ಸಿ.ಎಂ.ಸಿ ವಿಭಾಗದ ಮಹತ್ವದ ಜೊತೆಗೆ ಜೆ.ಇ.ಇ, ಎನ್.ಇ.ಇ.ಟಿ ತಯಾರಿಯ ಬಗೆಗೆ ಹೇಳಿದರು. ಅಲ್ಲದೆ ವಾಣಿಜ್ಯ ವಿಭಾಗದಲ್ಲಿ ಬಿ.ಎ.ಎಂ.ಎಸ್. ಕೋರ್ಸ್ ನ ಮಹತ್ವ ಹಾಗೂ ಸಿ.ಎ, ಸಿ.ಎಸ್ ನ ತಯಾರಿಯ ಬಗೆಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹೆತ್ತವರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ.ಅನಂತ್ ಪೈ ಸ್ವಾಗತಿಸಿ, ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ನಿರೂಪಿಸಿ, ಪ್ರಾಧ್ಯಾಪಕಿ ವರ್ಷ ಧನ್ಯವಾದ ಸಮರ್ಪಿಸಿದರು.