ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ.25 ರಿಂದ ಮಾ. 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಫೆ. 22 ಮತ್ತು 23ರಂದು ಜರಗಲಿರುವ ಹೊರೆ ಕಾಣಿಕೆಯ ಬಗ್ಗೆ ಪೂರ್ವಭಾವಿಯಾಗಿ ಭಾನುವಾರ ಸಮಾಲೋಚನಾ ಸಭೆ ಕಾಪುವಿನ ವಿವೇಕ್ ಕಾಂಪ್ಲೆಕ್ಸ್ ನ ಸರೋಜ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಜರಗಿತು.
ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಭಕ್ತರು ತಮ್ಮ ಸಮಯದ ಜೊತೆಗೆ ಸಹಕಾರವನ್ನೂ ನೀಡಿ ಕಾಪು ಹೊಸ ಮಾರಿಗುಡಿಯ ಹೊರೆಕಾಣಿಕೆ ಮತ್ತು ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಬೇಕಿದೆ. ಪೂರ್ವಭಾವಿಯಾಗಿ ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದರು.
ಹೊರೆ ಕಾಣಿಕೆ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೃಹತ್ ಹೊರೆ ಕಾಣಿಕೆಯನ್ನು ನಿರೀಕ್ಷಿಸಲಾಗಿದೆ.
ಫೆ.22 ರಂದು ದ.ಕ ಜಿಲ್ಲೆಯಿಂದ ಮತ್ತು ಫೆ. 23 ರಂದು ಉಡುಪಿ ಜಿಲ್ಲೆಯಿಂದ ಹೊರೆಕಾಣಿಕೆಯು ಶ್ರೀ ಕ್ಷೇತ್ರಕ್ಕೆ ಬರಲಿದೆ. ಈಗಾಗಲೇ ಉಭಯ ಜಿಲ್ಲೆಯ ದೇವಳಗಳು, ಸಂಘ ಸಂಸ್ಥೆಗಳ ಸಹಕಾರ ಕೋರಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಊರಿನಲ್ಲೂ ಸಭೆ ನಡೆಸಲಾಗುವುದು ಎಂದರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಸಂದರ್ಭೋಚಿತವಾಗಿ ಮಾತನಾಡಿದರು.
ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾಪು ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಸ್ವರ್ಣ ಗದ್ದುಗೆ ಸಮಿತಿ ಕಾರ್ಯದರ್ಶಿ ಕಾಪು ದಿವಾಕರ ಶೆಟ್ಟಿ, ಮೊಗವೀರ ಮಹಾಜನಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸುಹಾಸ್ ಹೆಗ್ಡೆ ನಂದಳಿಕೆ, ಹೊರೆ ಕಾಣಿಕೆ ಸಮಿತಿ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ ಬೈಕಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಳದ ಆಡಳಿತ ಮೊಕ್ತೇಸರ ದಯಾನಂದ ಹೆಜಮಾಡಿ, ಮಹಿಳಾ ಸಂಚಾಲಕಿಯರಾದ ಡಾ. ಸುನೀತಾ ಶೆಟ್ಟಿ ಕರ್ಜೆ, ಕಸ್ತೂರಿ ಪಂಜ, ಲಕ್ಷ್ಮೀ ಜನಾರ್ಧನ ದೇವಳದ ಮೊಕ್ತೇಸರ ಮನೋಹರ ಶೆಟ್ಟಿ, ಕಾಪು ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಹೊರೆ ಕಾಣಿಕೆ ಸಮಿತಿ ಕೋಶಾಧಿಕಾರಿಯಾಗಿ ಹರೀಶ್ ನಾಯಕ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಶೆಟ್ಟಿ ಪಾದೂರು ಮತ್ತಿತರರು, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯದರ್ಶಿ ದಿವಾಕರ್ ಶೆಟ್ಟಿ ಉಪಸ್ಥಿತರಿದ್ದರು.
ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿ, ಪ್ರಸ್ತಾವನೆಗೈದರು. ನಿರ್ಮಲ್ ಕುಮಾರ್ ಹೆಗ್ಡೆ ನಿರೂಪಿಸಿದರು.