ಬನ್ನಂಜೆಯ ನಾರಾಯಣಗುರು ವೃತ್ತ ತೆರವು ; ದಾರ್ಶನಿಕ ಪುರುಷರಿಗೆ ಮಾಡಿದ ಅಪಮಾನ - ರಘುಪತಿ ಭಟ್ ಖಂಡನೆ
Posted On:
31-08-2025 06:02PM
ಉಡುಪಿ : ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ ನಾರಾಯಣ ಗುರು ವೃತ್ತ ಎಂದು ಪದನಾಮಕರಣ ಮಾಡಿ ಸರ್ಕಾರ ಅನುಮತಿ ನೀಡಿ ಆದೇಶಿಸಿತ್ತು. ಆದರೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ವೃತ್ತ ತೆರವುಗೊಳಿಸಿ ಆ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದವನ್ನು ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಉಡುಪಿಯ ನಿಕಟಪೂರ್ವ ಶಾಸಕರಾದ ಕೆ ರಘುಪತಿ ಭಟ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.
ನಾರಾಯಣ ಗುರುಗಳು ಆಧ್ಯಾತ್ಮಿಕ ನಾಯಕ, ತತ್ವಜ್ಞಾನಿ ಮತ್ತು ಸಮಾಜ ಸುಧಾರಕರು. ಜಾತಿ ಪದ್ಧತಿಯ ಅನ್ಯಾಯಗಳ ವಿರುದ್ಧ ಹೋರಾಡಿ ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. ಅವರ ಗೌರವದ ಪ್ರತೀಕವಾಗಿ ಬನ್ನಂಜೆ ವೃತ್ತವನ್ನು ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ನಿರ್ಣಯಿಸಲಾಗಿತ್ತು.
ನಾನು ಶಾಸಕನಾಗಿದ್ದ ಅವಧಿಯಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಬರುವ ವೃತ್ತ ಹಾಗೂ ಜಂಕ್ಷನ್ ಗಳಿಗೆ ಮಹಾಪುರುಷರ ಹಾಗೂ ಗಣ್ಯವ್ಯಕ್ತಿಗಳ ಹೆಸರುಗಳನ್ನು ಪದನಾಮಕರಣ ಮಾಡುವ ಬಗ್ಗೆ ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಿ ತೀರ್ಮಾನ ಕೈಗೊಂಡು ಬಳಿಕ ಈ ಕುರಿತಾಗಿ ಸಾರ್ವಜನಿಕರ ಆಕ್ಷೇಪಣೆ ಹಾಗೂ ಶಾಂತಿ ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧೀಕ್ಷಕರ ವರದಿ ಕೇಳಲಾಗುತ್ತದೆ. ಈ ಎಲ್ಲಾ ವೃತ್ತ/ಜಂಕ್ಷನ್ ಗಳಿಗೆ ನಗರ ಸಭೆ ನಿರ್ಣಯಿಸಿ ತೀರ್ಮಾನಿಸಿದ ಹೆಸರುಗಳಿಗೆ ಯಾವುದೇ ಆಕ್ಷೇಪಣೆ ಇಲ್ಲದೆ ಇರುವ ಬಗ್ಗೆ ಜಿಲ್ಲಾಧಿಕಾರಿಯವರು ಸರ್ಕಾರಕ್ಕೆ ವರದಿ ಸಲ್ಲಿಸಿ ಬಳಿಕ ನಾನು ಸರ್ಕಾರದ ಮಟ್ಟದಲ್ಲಿ ಹಂತ ಹಂತವಾಗಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ 2022, ನವೆಂಬರ್ ರಲ್ಲಿ ಕರ್ನಾಟಕ ಪುರಸಭೆಗಳ ಅಧಿನಿಯಮ 1964 211ರ ಅನ್ವಯದಂತೆ ಉಡುಪಿ ನಗರಸಭಾ ವ್ಯಾಪ್ತಿಯ ಪ್ರಮುಖ ವೃತ್ತಗಳಿಗೆ, ಜಂಕ್ಷನ್ ಗಳಿಗೆ ಮಹಾಪುರುಷರ ಹಾಗೂ ಗಣ್ಯವ್ಯಕ್ತಿಗಳ ಹೆಸರುಗಳನ್ನು ಪದನಾಮಕರಣ ಮಾಡಲು ಸರ್ಕಾರ ಅನುಮತಿ ನೀಡಿ ಆದೇಶಿಸಿತ್ತು. ಅದರಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯ ಬನ್ನಂಜೆ ಸರ್ಕಲ್ ಗೆ "ನಾರಾಯಣಗುರು ವೃತ್ತ", ಕಲ್ಸಂಕ ವೃತ್ತಕ್ಕೆ "ಮಧ್ವಾಚಾರ್ಯ ವೃತ್ತ", ಡಯಾನಾ ಸರ್ಕಲ್ ಗೆ "ವಾದಿರಾಜ ವೃತ್ತ", ಸಂತೆಕಟ್ಟೆ ಕಲ್ಯಾಣಪುರ ರಸ್ತೆ ಜಂಕ್ಷನ್ ಗೆ "ಕೋಟಿ - ಚೆನ್ನಯ್ಯ ವೃತ್ತ", ಬ್ರಹ್ಮಗಿರಿ ದೊಡ್ಡ ಸರ್ಕಲ್ ಗೆ "ಆಸ್ಕರ್ ಫೆರ್ನಾಂಡಿಸ್ ಸರ್ಕಲ್" ಹಾಗೂ ಪರ್ಕಳದಿಂದ ಕೋಡಂಗೆ ಹಾಗೂ ಕೋಡಂಗೆಯಿಂದ ಸರಳಬೆಟ್ಟುಗೆ ಹಾದುಹೋಗುವ ಮಧ್ಯದಲ್ಲಿರುವ ವೃತ್ತಕ್ಕೆ "ಶ್ರೀರಾಮ ವೃತ್ತ" ಎಂದು ನಾಮಕರಣ ಮಾಡಲು ಆದೇಶಿಸಲಾಗಿತ್ತು.
ಸರ್ಕಾರದ ಆದೇಶದಂತೆ ಈ ಎಲ್ಲಾ ಸರ್ಕಲ್ ಗಳನ್ನು ನಗರ ಸಭೆಯಿಂದ ಸುಂದರವಾಗಿ ನಿರ್ಮಿಸುವ ಯೋಜನೆ ನನ್ನದಾಗಿತ್ತು. ಆದರೆ ಇದರಲ್ಲಿ ಈಗ ನಾರಾಯಣ ಗುರು ವೃತ್ತವನ್ನು ತೆರವುಗೊಳಿಸಿ ಆ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು ತಪ್ಪು. ಇದು ಸರ್ಕಾರದ ಆದೇಶದ ಉಲ್ಲಂಘನೆಯಾಗಿದ್ದು, ತಪ್ಪು ಮಾಡಿದವರನ್ನು ತಕ್ಷಣದಲ್ಲಿ ಪತ್ತೆ ಹಚ್ಚಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಮತ್ತು ಬನ್ನಂಜೆ ವೃತ್ತದಲ್ಲಿ ನಗರ ಸಭೆ ವತಿಯಿಂದ ಸುಂದರವಾದ ನಾರಾಯಣ ಗುರು ವೃತ್ತ ನಿರ್ಮಾಣ ಮಾಡಬೇಕು. ಇಲ್ಲವಾದಲ್ಲಿ ಈ ಬಗ್ಗೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ನಾನು ನೀಡುತ್ತೇನೆ ಎಂದು ತಿಳಿಸಿದ್ದಾರೆ.