ಕನ್ನಡ ಸಂಘ ಬಹರೈನ್ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ
Posted On:
13-09-2025 08:47AM
ಕಾಪು : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿಶೇಷ ಶಿಫಾರಸಿನ ಮೇರೆಗೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕನ್ನಡ ಸಂಘ ಬಹರೈನ್ಗೆ ಒಂದು ಕೋಟಿ ರೂಪಾಯಿಗಳ ಅನುದಾನವನ್ನು ಅಧಿಕೃತವಾಗಿ ಅನುಮೋದಿಸಿದ್ದಾರೆ.
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ, ಅನಿವಾಸಿ ಭಾರತೀಯ ಸಮಿತಿ – ಕರ್ನಾಟಕ ಇದರ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರು ಮುಖ್ಯಮಂತ್ರಿಗಳಿಗೆ ಅನುದಾನಕ್ಕಾಗಿ ಮನವಿ ಸಲ್ಲಿಸಿದರು.
ಕನ್ನಡ ಸಂಘದ ಅಧ್ಯಕ್ಷ ಅಜಿತ್ ಬಂಗೇರ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಕರ್ನಾಟಕ ಸರಕಾರದ ಅನುದಾನ ನಿಧಿಯಿಂದ ಬಿಡುಗಡೆ ಮಾಡಲು ಅನುಮತಿ ನೀಡಿದ್ದಾರೆ.
ಇತ್ತೀಚೆಗೆ ಕನ್ನಡ ಸಂಘ ಕಟ್ಟಡ ಸಮುಚ್ಚಯ ವಿದೇಶದಲ್ಲಿ ನಿರ್ಮಿತ ಪ್ರಥಮ ಕನ್ನಡ ಭವನವನ್ನು ಭೇಟಿ ಮಾಡಿದ ಸಂದರ್ಭದಲ್ಲಿ, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಂಘದ ಮೂಲಭೂತ ಅಗತ್ಯಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಧನಸಹಾಯ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದರು.
ಮುಖ್ಯಮಂತ್ರಿಗಳ ಈ ಅನುಮೋದನೆಯೊಂದಿಗೆ, ಕನ್ನಡ ಸಂಘ ಬಹರೈನ್ ತನ್ನ ಮೂಲಸೌಕರ್ಯ, ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸಲು ಮಹತ್ವದ ನೆರವನ್ನು ಪಡೆಯಲಿದೆ ಹಾಗೂ ಸಂಘದ ಅಧ್ಯಕ್ಷರಾದ ಅಜಿತ್ ಬಂಗೇರ ಅವರು ವೈಯಕ್ತಿಕವಾಗಿ ಹಾಗೂ ಬಹರೈನ್ ಕನ್ನಡಿಗರ ಪರವಾಗಿ ಕೃತಜ್ಞತೆ ಸಲ್ಲಿಸಿದರು.